![](https://kannadadunia.com/wp-content/uploads/2024/01/Koppala-Gawisiddeshwara.jpg)
ಕೊಪ್ಪಳ : ಕೊಪ್ಪಳ ನಗರದಲ್ಲಿ ಇಂದು ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವ ನಡೆಯಲಿದ್ದು, ಭಕ್ತರಿಗೆ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿರುವ ಲಕ್ಷಾಂತರ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಕಲ್ಪಿಸುವ ನಿರ್ವಹಣೆಯ ಮೇಲುಸ್ತುವಾರಿಯನ್ನು ಮಾಡಲು ಉಪವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದೇಶದ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರು, ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ಆಹಾರ ವ್ಯವಸ್ಥೆ, ಜನ ಸಂದಣಿ ನಿರ್ವಹಣೆ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಪೊಲೀಸ್ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜೆಸ್ಕಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಗ್ನಿಶಾಮಕ ಇಲಾಖೆ, ಲೋಕೋಪಯೋಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳನ್ನು ನಿಯೋಜನೆ ಮಾಡಿ ಆದೇಶಿಸಲಾಗಿರುತ್ತದೆ.
ಪೊಲೀಸ್ ಇಲಾಖೆಯಿಂದ ಕೊಪ್ಪಳ ಉಪ ಪೊಲೀಸ್ ಅಧೀಕ್ಷಕರನ್ನು ನಿಯೋಜಿಸಲಾಗಿದ್ದು, ಜಾತ್ರೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್, ಸಿ.ಸಿ.ಕ್ಯಾಮರಾಗಳ ಅಳವಡಿಕೆ, ಜಾತ್ರಾ ಸ್ಥಳದಲ್ಲಿ ಔಟ್ ಪೊಲೀಸ್ ಸ್ಟೇಷನ್ ಪ್ರಾರಂಭ, ವಾಹನಗಳ ನಿಲುಗಡೆಗೆ ಸ್ಥಳ ಗುರುತಿಸಿ ನಗರದ ವಿವಿಧ ಸ್ಥಳಗಳಲ್ಲಿ ಪಾರ್ಕಿಂಗ್ ನಕಾಶೆಯ ಬ್ಯಾನರ್ಗಳ ಅಳವಡಿಕೆ, ವಾಹನಗಳ ಸಂಚಾರ ನಿಯಂತ್ರಣಕ್ಕಾಗಿ ಸೂಕ್ತ ಪೊಲೀಸ್ ಸಿಬ್ಬಂದಿಗಳ ಹಾಗೂ ಅವಶ್ಯಕವಿದ್ದ ಸ್ಥಳಗಳಲ್ಲಿ ಗೃಹರಕ್ಷಕರ ನಿಯೋಜನೆ. ಗಣ್ಯರಿಗೆ ಸೂಕ್ತ ಸಂಚಾರ ವ್ಯವಸ್ಥೆ, ಇನ್ನಿತರ ಭದ್ರತಾ ವ್ಯವಸ್ಥೆ ಹಾಗೂ ಕಾಲ ಕಾಲಕ್ಕೆ ಅಗತ್ಯತೆಗೆ ತಕ್ಕಂತೆ ಕಾರ್ಯನಿರ್ವಹಿಸಲು ಅಧೀನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ತಿಳಿಸಿದೆ.
`ಅಸ್ಮಿತೆ’ ವಸ್ತು ಪ್ರದರ್ಶನ, ಮಾರಾಟ ಮೇಳ
ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2024ರ ಪ್ರಯುಕ್ತ ಶ್ರೀ ಗವಿಮಠದ ಜಾಗೃತಿ ನಡಿಗೆ “ಕಾಯಕ ದೇವೋಭವ’’ ಅಭಿಯಾನದಡಿ `ಅಸ್ಮಿತೆ’ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಜನವರಿ 27 ರಿಂದ ಫೆಬ್ರವರಿ 09ರವರೆಗೆ ಜಾತ್ರಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
`ಅಸ್ಮಿತೆ’ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಜ.27 ರಿಂದ ಫೆ.09ರ ವರೆಗೆ ಬೆಳಿಗ್ಗೆ 10.30 ರಿಂದ ರಾತ್ರಿ 9.30 ಗಂಟೆಯ ವರೆಗೆ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಸಾರ್ವಜನಿಕರು ಅಸ್ಮಿತೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಭೇಟಿ ನೀಡಿ, ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಪ್ರೋತ್ಸಾಹಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.