ಬೆಂಗಳೂರು: ಬಿಪಿಎಲ್ ಮತ್ತು ಎಪಿಎಲ್ ಕುಟುಂಬದ ಹೆಚ್ಐವಿ ಪೀಡಿತರಿಗೆ ಉಚಿತವಾಗಿ ಔಷಧ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
ಆರೋಗ್ಯ ಮತ್ತು ವೈದ್ಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಉಚಿತ ಔಷಧ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಈ ಯೋಜನೆ ಬಿಪಿಎಲ್ ಮತ್ತು ಎಪಿಎಲ್ ಕುಟುಂಬದವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ಹೆಚ್ಐವಿ ಪೀಡಿತರನ್ನು ಅವಮಾನಕಾರಿಯಾಗಿ ನೋಡಬಾರದು. ರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧವಲ್ಲ ಎಂಬ ಸಂದೇಶವನ್ನು ಕೊರೊನಾ ಸೋಂಕು ಬಂದ ಸಂದರ್ಭದಲ್ಲಿ ನೀಡಲಾಗಿತ್ತು. ಇದು ಎಲ್ಲ ರೋಗಿಗಳಿಗೂ ಅನ್ವಯವಾಗುತ್ತದೆ ಎಂದು ಅವರು ಹೇಳಿದ್ದು, ಶೀಘ್ರದಲ್ಲೇ ಕೊರೋನಾ ಲಸಿಕೆ ಲಭ್ಯವಾಗಲಿದ್ದು ಆದ್ಯತಾ ವಲಯದವರಿಗೆ ಮೊದಲು ನೀಡಲಾಗುತ್ತದೆ ಎಂದು ಹೇಳಿದ್ದಾರೆ.