ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಅತಿಥಿ ಶಿಕ್ಷಕರ ಸಂಘದಿಂದ ಆಗಸ್ಟ್ 23, 24ರಂದು ಶಾಲೆ ತೊರೆಯುವ ಅಭಿಯಾನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
ಸಂಘದ ಅಧ್ಯಕ್ಷ ಎನ್.ಹೆಚ್. ಹನುಮಂತ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 10 -12 ವರ್ಷಗಳಿಂದ ಸೇವಾ ಭದ್ರತೆ ಇಲ್ಲದೆ ಕಡಿಮೆ ವೇತನಕ್ಕೆ ಶಿಕ್ಷಕರು ದುಡಿಯುತ್ತಿದ್ದಾರೆ. ಕಳೆದ ತಿಂಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆ ಈಡೇರಿಸಲು ಹೋರಾಟ ನಡೆಸಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ರಾಜ್ಯಾದ್ಯಂತ ಎರಡು ದಿನ ಎಲ್ಲಾ ಅತಿಥಿ ಶಿಕ್ಷಕರು ಶಾಲೆ ತೊರೆಯುವ ಅಭಿಯಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಅತಿಥಿ ಶಿಕ್ಷಕರಿಗೆ ಸೇವಾ ಹಿರಿತನ ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು. ಕೆಲಸದ ವೇಳೆ ಕಾಯಂ ಹುದ್ದೆ ಭರ್ತಿಯಾದಲ್ಲಿ ಬಿಡುಗಡೆ ಮಾಡಬಾರದು. ಸರಿಯಾಗಿ ವೇತನ ಕೊಡಬೇಕು. ಕಾಯಂ ಶಿಕ್ಷಕರ ಹಾಜರಾತಿಯಲ್ಲಿ ಅತಿಥಿ ಶಿಕ್ಷಕರ ವಿಲೀನಗೊಳಿಸಬೇಕು. ಇಎಲ್, ಸಿಎಲ್, ಮಹಿಳೆಯರಿಗೆ ಹೆರಿಗೆ ರಜೆ ನೀಡಬೇಕು. ದೆಹಲಿ, ಪಂಜಾಬ್ ಮಾದರಿಯಲ್ಲಿ ರಾಜ್ಯದಲ್ಲಿಯೂ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಸೂಕ್ತ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಲಾಗಿದೆ.