ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಂದು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಎರಡು ದಿನಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಮದ್ದೂರು ಉದ್ವಿಗ್ನಗೊಂಡಿದ್ದ ಬೆನ್ನಲ್ಲೇ ಇಂದಿನ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಪೊಲೀಸರಿಗೆ ಸವಲಾಗಿ ಪರಿಣಮಿಸಿದೆ.
ಮದ್ದೂರಿನಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಬೆಳಿಗ್ಗೆ 10:30ಕ್ಕೆ 28 ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. 3 ಕಿ.ಮೀ ವರೆಗೆ ಮೆರವಣಿಗೆ ಸಾಗಲಿದ್ದು, ನಗರದ ಐಬಿ ವೃತ್ತದಿಂದ ಗಣೇಶ ಮೂರ್ತಿಗಳ ಮೆರವಣಿಗೆ ಪ್ರಾರಂಭವಾಗಲಿದೆ. ಪೇಟೆಬೀದಿ, ಕೊಲ್ಲಿ ಸರ್ಕಲ್ ಮಾರ್ಗವಾಗಿ ಮೆರವಣಿಗೆ ಸಾಗಿ ಬಳಿಕ ಶಿಂಷಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ.
ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಮದ್ದೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿಂತೆ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮದ್ದೂರಿನಲ್ಲಿ 2000 ಪೊಲೀಸರನ್ನು ನಿಯೋಜಿಸಲಾಗಿದೆ.