ಜುಲೈ 7ರಂದು ರಾಜ್ಯದ ಮಹಾನಗರ ಪಾಲಿಕೆಗಳ ನೌಕರರ ಸಾಮೂಹಿಕ ರಜೆ, ಪ್ರತಿಭಟನೆ

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಸಿಬ್ಬಂದಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 7 ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಬೇಡಿಕೆಗಳಿಗೆ ಸ್ಪಂದಿಸದಿರುವುದರಿಂದ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿರುವುದಾಗಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತ ರಾಜ್ ತಿಳಿಸಿದ್ದಾರೆ.

ಪಾಲಿಕೆಗಳ ಅಧಿಕಾರಿ, ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಾಭಿವೃದ್ಧಿ ಸಚಿವರು ಮತ್ತು ಕಾರ್ಯದರ್ಶಿಗೆ ಅನೇಕ ಬಾರಿ ಮನವಿ ನೀಡಲಾಗಿದೆ. ಆದರೂ ಸ್ಪಂದಿಸಿಲ್ಲ. ಹೀಗಾಗಿ ಎಲ್ಲರೂ ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರಿಗೆ ನೀಡಿರುವ ಏಳನೇ ವೇತನ ಆಯೋಗದ ಸೌಲಭ್ಯ ನೀಡಬೇಕು, ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು, ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು. ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯಗಳನ್ನು ಪಾಲಿಕೆಯ ನೌಕರರಿಗೂ ಜಾರಿಗೊಳಿಸಬೇಕು. ಆರೋಗ್ಯ ಸೌಲಭ್ಯದ ಜ್ಯೋತಿ ಸಂಜೀವಿನಿ/ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪಾಲಿಕೆ ಸಿಬ್ಬಂದಿಗೆ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read