ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ ವಿರುದ್ಧ ಅರಣ್ಯ ಭೂಮಿ ಒತ್ತುವರಿ, ಅರಣ್ಯ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಮತ್ತಿತರ ದೂರುಗಳು ಬಂದಿದ್ದು, ಈ ಕುರಿತಂತೆ ಪರಿಶೀಲನೆ ನಡೆಸಿ ವರದಿ ನೀಡಲು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಯಾವುದೇ ಸಂಶೋಧನೆಗೆ ನಿರ್ದಿಷ್ಟ ಸಮಯಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ಆದರೆ, ಈ ಪ್ರದೇಶದಲ್ಲಿ ವರ್ಷವಿಡೀ ಸಂಶೋಧನೆ ಹೆಸರಲ್ಲಿ ಛಾಯಾಗ್ರಹಣ ನಡೆಸಲಾಗುತ್ತಿದೆ. ಕಾಳಿಂಗ ಸರ್ಪಗಳ ಸೆರೆ, ರಕ್ಷಣೆ ಹೆಸರಲ್ಲಿ ಅಕ್ರಮ ಚಟುವಟಿಕೆ ನಡೆದಿವೆ. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಭೂಮಿ ಒತ್ತುವರಿ, ಕಟ್ಟಡ ನಿರ್ಮಾಣ, ಕಾಳಿಂಗ ಸರ್ಪಗಳ ಆವಾಸಸ್ಥಾನದಲ್ಲಿ ವಾಣಿಜ್ಯ ಚಟುವಟಿಕೆ, ವನ್ಯಜೀವಿ ಕಾಯ್ದೆ ಉಲ್ಲಂಘನೆ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವರು ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸಲು ಸೂಚಿಸಿದ್ದಾರೆ.