ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಕ್ರಾಂತಿ ಕುರಿತಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ನಾಳೆ ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಆಗಮಿಸಲಿದ್ದಾರೆ.
ಅವರು ಶಾಸಕರೊಂದಿಗೆ ಒನ್ ಟು ಒನ್ ಚರ್ಚೆ ನಡೆಸಿ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಪಕ್ಷದ ಹಿರಿಯ ಶಾಸಕರು ಮತ್ತು ನೂತನ ಶಾಸಕರೊಂದಿಗೆ ಸುರ್ಜೆವಾಲಾ ಚರ್ಚೆ ನಡೆಸಲಿದ್ದು, ಸುಮಾರು 40ಕ್ಕೂ ಹೆಚ್ಚು ಶಾಸಕರಿಗೆ ಬುಲಾವ್ ನೀಡಿದ್ದಾರೆ. ಒಬ್ಬೊಬ್ಬ ಶಾಸಕರಿಗೆ ತಲಾ 10 ನಿಮಿಷ ಸಮಯ ನೀಡಿರುವ ಸುರ್ಜೆವಾಲಾ ತಾವೇ ಖುದ್ದಾಗಿ ಕರೆ ಮಾಡಿ ಶಾಸಕರನ್ನು ಆಹ್ವಾನಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶಾಸಕರೊಂದಿಗೆ ಒನ್ ಟು ಒನ್ ಮಾತುಕತೆ ನಡೆಸಲಿದ್ದಾರೆ. ಪಕ್ಷಕ್ಕೆ ಅನುಕೂಲ ಆಗುವಂತೆ ಕೆಲಸ ಮಾಡುತ್ತಿರುವ ಶಾಸಕರಿಗೂ ಬುಲಾವ್ ನೀಡಲಾಗಿದೆ. ಶಾಸಕರ ವಿರುದ್ಧ ಇರುವ ಪ್ರಕರಣಗಳ ಬಗ್ಗೆಯೂ ಸುರ್ಜೇವಾಲಾ ಮಾಹಿತಿ ಸಂಗ್ರಹಿಸಿದ್ದಾರೆ. ಒಟ್ಟಾರೆ ರಾಜ್ಯ ಕಾಂಗ್ರೆಸ್ ಮತ್ತು ಸರ್ಕಾರದಲ್ಲಿನ ಬೆಳವಣಿಗೆ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.