ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು, ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಿದೆ. 2025ರ ಸೆಪ್ಟೆಂಬರ್ 10 ರಿಂದ 2025ರ ಸೆಪ್ಟೆಂಬರ್ 20 ರವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆಪ್ಟೆಂಬರ್ 23 ಹಾಗೂ 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ಪ್ರಕ್ರಿಯೆಗಳು ಜರುಗಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಪ್ರಸ್ತುತ ಖಾಲಿ ಹುದ್ದೆಗಳ, ಕಡ್ಡಾಯ ವರ್ಗಾವಣೆಗಳ ರಾಜ್ಯವಾರು ಅಂತಿಮ ಪಟ್ಟಿ ಹಾಗೂ ವರ್ಗಾವಣೆಯಿಂದ ವಿನಾಯತಿಗಾಗಿ ಕೋರಿಕೆ ಸಲ್ಲಿಸಿದವರ ಪಟ್ಟಿಯನ್ನು https://rdprtransfer.karnataka.gov.in/ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು, ಆಗಸ್ಟ್ 29ರಂದು ವಿಶೇಷ ಪ್ರಕರಣಗಳ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿಯನ್ನು, ಸೆಪ್ಟೆಂಬರ್ 1ರಂದು ಸಾಮಾನ್ಯ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸೆಪ್ಟೆಂಬರ್ 3 ರಿಂದ 8ರವರೆಗೆ ವಿಶೇಷ ಪ್ರಕರಣಗಳ ಮೊದಲ ಸುತ್ತಿನ ಕೌನ್ಸಿಲಿಂಗ್ ಹಾಗೂ ಸೆ. 8ರಂದು ವಿಶೇಷ ಪ್ರಕರಣಗಳ ಎರಡನೇ ಸುತ್ತಿನ ಕೌನ್ಸಿಲಿಂಗ್ ಕೈಗೊಳ್ಳಲಾಗುತ್ತದೆ.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಆಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 & ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು 2024 ಅನ್ನು ರಚಿಸಿ, ಅಧಿಸೂಚನೆ ಹೊರಡಿಸಲಾಗಿದೆ. ಈ ನಿಯಮಗಳಿಗೆ ಸೂಕ್ತ ತಿದ್ದುಪಡಿಗಳನ್ನು ತಂದು, ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ಕಡ್ಡಾಯವಾಗಿ ವರ್ಗಾವಣೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಇಲಾಖೆಯು ಇದೇ ಮೊದಲ ಬಾರಿಗೆ ಪಿಡಿಒ ವರ್ಗಾವಣೆ ಪ್ರಕ್ರಿಯೆಯನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ನಡೆಸುತ್ತಿದ್ದು, ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ. ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ ಸಂಬಂಧಿಸಿದಂತೆ 31 ಜಿಲ್ಲೆಗಳಲ್ಲಿ ಅರ್ಹತೆ ಹೊಂದಿದ 1,300 ನೌಕರರಿಗೆ ಆನ್ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಹೊರಡಿಸಿ ಸ್ಥಳದಲ್ಲೇ ನೌಕರರಿಗೆ ನೀಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.