ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಘೋಷಿಸಿರುವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಇತ್ತೀಚೆಗೆ ವಿಶ್ವವಿದ್ಯಾಲಯ ಕುಲಪತಿಗೆ ಅವರು ಪತ್ರ ಬರೆದು ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯುವಂತೆ ಕೋರಿದ್ದಾರೆ.
ವಿಶ್ವ ವಿದ್ಯಾಲಯದ ಕುಲಾಧಿಪತಿ, ಸಮ ಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನಾ ಮಂಡಳಿ ಸದಸ್ಯರ ವತಿಯಿಂದ ಮಾರ್ಚ್ 27 ರಂದು ನನಗೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಡಿ.ಲಿಟ್ ಪದವಿ ಘೋಷಿಸಿದ್ದು, ಈ ಗೌರವಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ಈ ಪದವಿ ಘೋಷಿಸುವ ಮೂಲಕ ತಮ್ಮ ಜವಾಬ್ದಾರಿ ಹೆಚ್ಚಿಸಲಾಗಿದೆ. ಆದರೆ, ತಾವು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳನ್ನು ಕಾರ್ಯರೂಪಕ್ಕೆ ತಂದು ಸಫಲಗೊಳಿಸುವ ಹೊಣೆಗಾರಿಕೆ ನಿಭಾಯಿಸಲು ಸಮಯ ನೀಡಬೇಕಾದ ಕಾರಣ ತಮಗೆ ಘೋಷಿಸಿರುವ ಪದವಿ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.
ತಮಗೆ ಹಾಗೂ ವ್ಯವಸ್ಥಾಪನಾ ಮಂಡಳಿಗೆ ನಾನು ಹೃತ್ಪೂರ್ವಕವಾಗಿ ಆಭಾರಿಯಾಗಿದ್ದೇನೆ. ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿ ಹೆಚ್ಚಿಸಿದ್ದೀರಿ. ಅದನ್ನು ಕಾರ್ಯರೂಪಕ್ಕೆ ತರುವ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.