ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಶಾಲೆಯ ನೀರಿನ ಟ್ಯಾಂಕಿಗೆ ವಿಷ : CM ಸಿದ್ದರಾಮಯ್ಯ ಹೇಳಿದ್ದೇನು.?

ಬೆಂಗಳೂರು : ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಲು ಶಾಲೆಯ ನೀರಿನ ಟ್ಯಾಂಕಿಗೆ ವಿಷ ಹಾಕಿದ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ. ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ. “ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ. ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ ಆತ್ಮವಿಮರ್ಷೆ ಮಾಡಿಕೊಳ್ಳಲಿ.

ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ?@BYVijayendraಹೊರುವರೇ? @RAshokaBJP ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ. ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು. ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ. ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read