ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸಿರುವುದನ್ನು ವಿರೋಧಿಸಿ ವಿವಿಧೆಡೆ ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಣ್ಣ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ
ರಾಜಕೀಯ ಏರುಪೇರುಗಳು ನನಗೆ ಹೊಸತಲ್ಲ. ಯಾವುದೇ ರಾಜಕೀಯ ಬದಲಾವಣೆಗೂ ಎಂದೂ ದೃಢಿಗೆಟ್ಟವನಲ್ಲ, ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.
ಆತ್ಮೀಯ ಹಾಗೂ ಅಭಿಮಾನಿ ಬಂಧುಗಳಲ್ಲಿ ನನ್ನದೊಂದು ಕೋರಿಕೆ ಏನೆಂದರೆ, ಯಾವುದೇ ಕಾರಣಕ್ಕೂ ಅಭಿಮಾನದ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಕೆಲವು ಯುವಜನರು ಅಹಿತಕರವಾಗಿ ತಮಗೆ ತಾವು ನೋವು ಮಾಡಿಕೊಂಡಿದ್ದು ನನ್ನ ಮನಸ್ಸಿಗೆ ದುಃಖ ತಂದಿದೆ. ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬಗಳು ಮನೆಯಲ್ಲಿ ಕಾಯುತ್ತಿರುತ್ತಾರೆ. ನಾನು ಸಹ ನಿಮ್ಮನ್ನು ನನ್ನ ಕುಟುಂಬವೆಂದೇ ಭಾವಿಸಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನ ಎಂತಹದ್ದು ಎಂಬುದನ್ನು ಕಣ್ಣಾರೆ ಕಂಡಿದ್ದೇನೆ ಎಂದು ತಿಳಿಸಿದ್ದಾರೆ.
ಹಾಗಾಗಿ, ಯಾವುದೇ ತಪ್ಪು ನಿರ್ಧಾರ ಮಾಡಬೇಡಿ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನವನ್ನು ಮಾಡಬೇಡಿ. ನಾವೆಲ್ಲರೂ ಬುದ್ಧ, ಬಸವ, ವಾಲ್ಮೀಕಿ, ಅಂಬೇಡ್ಕರ್ ರವರ ಹಾದಿಯಲ್ಲೇ ಸಮಾಜ ಮುಖ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ. ಹಾಗೂ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ನಿಮ್ಮನ್ನು ಕೋರುತ್ತೇನೆ ಎಂದು ತಿಳಿಸಿದ್ದಾರೆ.