ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರವಾಗಿ ಮುಂದಿನ ಒಂದು ತಿಂಗಳಲ್ಲಿ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪ್ರಸ್ತಾಪವನ್ನು ಸಚಿವ ಸಂಪುಟ ಸಭೆಗೆ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ಅಂಶಗಳ ಕುರಿತಾಗಿ ಎಲ್ಲೆಡೆ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ಬಳಿಕವೇ ಸಂಪುಟ ಸಭೆಗೆ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಂತಹ ನಗರದಲ್ಲಿ ಪ್ರತಿದಿನ ಎರಡರಿಂದ ಮೂರು ಗಂಟೆ ಸಂಚಾರ ದಟ್ಟಣೆಯಲ್ಲೇ ಕಳೆಯುವ ಉದ್ಯೋಗಿಗಳು ಮತ್ತೆ 10 ಗಂಟೆ ದುಡಿಯುವುದು ಮೇಲ್ನೋಟಕ್ಕೆ ನನಗೆ ಸರಿ ಎನಿಸುವುದಿಲ್ಲ. ಆದರೆ, ಎಲ್ಲರ ಅಭಿಪ್ರಾಯ ಸಂಗ್ರಹಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲಸದ ಅವಧಿಯನ್ನು 9 ರಿಂದ 10 ಗಂಟೆಗೆ ಹೆಚ್ಚಳ ಮಾಡಬೇಕೆಂಬ ಕೇಂದ್ರ ಸರ್ಕಾರದ ಪ್ರಸ್ತಾವನೆ, ಪ್ರಸ್ತಾವಿತ ತಿದ್ದುಪಡಿಯಿಂದ ವಾರದ ಗರಿಷ್ಠ ಕೆಲಸದ ಅವಧಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. 48 ತಾಸುಗಳೇ ಇರಲಿದೆ. ಪ್ರಸ್ತುತ ಕಾನೂನಿನಡಿ ಕೆಲಸದ ಅವಧಿ 9 ತಾಸು ಇದೆ. ಹೊಸ ಪ್ರಸ್ತಾವದಂತೆ ದಿನದ ಕೆಲಸದ ಅವಧಿಯನ್ನು 10 ಗಂಟೆಗೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಈ ಅವಧಿಯಲ್ಲಿ ಒಂದು ಗಂಟೆ ಭೋಜನ ವಿರಾಮ ಕೂಡ ಸೇರಿದ್ದು, ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವುದಾಗಿ ಹೇಳಿದ್ದಾರೆ.