ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಬೆಂಗಳೂರನ್ನು ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಗೆಲ್ಲಬೇಕೆಂಬ ಉದ್ದೇಶದಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್ ಮೊರೆ ಹೋಗಿ ಹೋರಾಟ ಮಾಡಲಾಗುವುದು ಎಂದರು.
ಬೆಂಗಳೂರನ್ನು ಒಡೆಯಿರಿ ಎಂದು ಜನರು ಕೇಳಿಲ್ಲ. ಈಗಾಗಲೇ ನಗರದಲ್ಲಿ ತೆರಿಗೆ, ಸೆಸ್, ಇ ಖಾತಾದಿಂದ ಸಮಸ್ಯೆ ಉಂಟುಮಾಡಿದ್ದಾರೆ. ಇಂತಹ ಸಮಯದಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲು ಖಚಿತ ಎಂದು ಹೀಗೆ ವಿಭಜನೆ ಮಾಡಿದ್ದಾರೆ ಎಂದರು.
ಕಪ್ಪು ಪಟ್ಟಿಯಲ್ಲಿರುವ ಗುತ್ತಿಗೆದಾರರಿಗೆ ಸುರಂಗ ರಸ್ತೆ ಯೋಜನೆಯನ್ನು ನೀಡಲಾಗುತ್ತಿದೆ. ಸುರಂಗ ರಸ್ತೆಗೆ ಟೋಲ್ ಕೂಡ ಇರುವುದರಿಂದ ಶ್ರೀಮಂತರು ಮಾತ್ರ ಇದನ್ನು ಬಳಸಬಹುದು. ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಿಲ್ಲ. ಅಭಿವೃದ್ಧಿಗೆ ನಮ್ಮ ಸಹಕಾರವಿದೆ. ಆದರೆ ದುಡ್ಡು ಕೊಳ್ಳೆ ಹೊಡೆಯುವ ಯೋಜನೆಗಳನ್ನು ವಿರೋಧಿಸುತ್ತೇವೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಭೂಕಂಪದ ನಾಡು ಮಾಡಬಾರದು ಎಂದರು.
ಹೆಬ್ಬಾಳ ಮೇಲ್ಸೇತುವೆ ಬಳಿಯ ಜಂಕ್ಷನ್ಗೆ ಎಲ್ಲ ಕಡೆಯಿಂದ ವಾಹನಗಳು ಬರುತ್ತವೆ. ಅಂತಹ ಜಾಗವನ್ನು ಖಾಸಗಿ ಭೂ ಮಾಲೀಕರಿಗೆ ನೀಡಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ಸದನದಲ್ಲಿ ಚರ್ಚಿಸಲಾಗುವುದು. ಇ ಖಾತಾ ವಿಚಾರದಲ್ಲಿ ಜನರಿಗೆ ತೊಂದರೆ ನೀಡಲಾಗುತ್ತಿದೆ. ಹಣ ಲೂಟಿ ಮಾಡಲು ಬೆಂಗಳೂರನ್ನು ಬಳಸಬಾರದು ಎಂದು ಹೇಳಿದರು.