ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂಬೂದೂ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.
ರೌಡಿ ಶೀಟರ್ ಕೊಲೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಬೈರತಿ ಬಸವರಾಜ್, ಕೊಲೆ ಕೇಸ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದರು.
ಸುಖಾಸುಮ್ಮನೇ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಎಫ್ ಐ ಆರ್ ದಾಖಲಿಸಬಹುದಾ? ಎಫ್ ಐ ಆರ್ ದಾಖಲಿಸುವಾಗ ನನಗೆ ಮಾಹಿತಿ ಕೂಡ ನೀಡಿಲ್ಲ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.