ಹಾಸನ: ನಿರಂತರ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಭೂಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದೆ. ಶಿರಾಡಿಘಾಟ್ ಮಾರ್ಗದಲ್ಲಿ ವಾಹನ ಸಂಚಾರ ತಾತ್ಕಾಲಿಕ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗ ಅನುಸರಿಸಲು ಸೂಚಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.