ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆ. ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು ಎಂದರು.
ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದು ಹೇಳಿದರು. ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಆರೋಪಿಸಿರುವ ವಿಚಾರವಾಗಿ ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವೆವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ದಾಖಲೆ ಲಭ್ಯವಿದೆ.ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು.