BIG NEWS: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯ ಹೈಲೈಟ್ಸ್

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರ ಮಹತ್ವದ ಸಭೆ ನದೆಯಿತು.

ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು ಹೀಗಿವೆ:

• ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಸಕ್ಕರೆ ಕಾರ್ಖಾನೆ ಮಾಲಿಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಲಾಗುವುದು. ಹೆಚ್ವುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.

• ಎಥೆನಾಲ್ ಎಂಎಸ್ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10ಲಕ್ಷ ಮೆ. ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷರು ತಿಳಿಸಿದರು.

ಸಕ್ಕರೆ ಉತ್ಪಾದನೆ ಮತ್ತು ಮಾರಾಟ, ಎಥೆನಾಲ್ ಉತ್ಪಾದನೆ ಮತ್ತು ಬೆಲೆ ನಿಗಧಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗಧಿ ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದು ಕಾರ್ಖಾನೆ ಮಾಲೀಕರು ಹೇಳಿದ್ದಾರೆ.

ಇದೇ ವೇಳೆ ಕೇಂದ್ರದ ನೀತಿಯಿಂದ ದಕ್ಷಿಣ ಭಾರತದ ಕಾರ್ಖಾನೆಗಳು ಸಮಸ್ಯೆಯಲ್ಲಿವೆ, ಉತ್ತರ ಭಾರತದ ಕಾರ್ಖಾನೆಗಳು ಅನುಕೂಲಕರವಾಗಿವೆ ಎಂದು ಕಾರ್ಖಾನೆ ಮಾಲೀಕರುಗಳ ಒಟ್ಟಾಭಿಪ್ರಾಯ ವ್ಯಕ್ತಪಡಿಸಿದರು.

ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ. ಮತ್ತು ಕಾರ್ಖಾನೆಗಳ ಜವಾಬ್ದಾರಿಯೂ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಸಿಎಂ ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read