ಕಲಬುರಗಿ : ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳನ್ನು ನೋಡಿದಾಗ ಶೈಕ್ಷಣಿಕವಾಗಿ ಕಲಬುರಗಿ ಜಿಲ್ಲೆ ಬಹಳಷ್ಟು ಸುಧಾರಿಸಬೇಕಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶಿಕ್ಷಣ ಒಂದು ಸಮಾಜದ ಸ್ಥಿತಿಗತಿಗಳನ್ನು ಅಳೆಯುವ ಮಾನದಂಡವಾಗಿದೆ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಗಳೂ ಸಹ ಶೈಕ್ಷಣಿಕ ಗುಣಮಟ್ಟದ ಮೇಲೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಣಾಮ ಬೀರುತ್ತವೆ ಎನ್ನುವುದನ್ನೂ ಸಹ ಒಪ್ಪಿಕೊಳ್ಳಬೇಕಿದೆ.
ಕಲಬುರಗಿ ಜಿಲ್ಲೆಯಲ್ಲಿನ ಶೈಕ್ಷಣಿಕ ಸ್ಥಿತಿಯನ್ನು ಉತ್ತಮಗೊಳಿಸುವ ಕೆಲಸ ನಾವು ಮಾಡಲೇಬೇಕಿದೆ. ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ನ್ಯೂನ್ಯತೆಗಳೇನು, ಪರಿಹಾರಗಳೇನು ಎಂಬುದರ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕು ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು ಎಂಬ ದೃಷ್ಟಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಕಲಬುರಗಿ ವಿಭಾಗದ ಅಪರ ಆಯುಕ್ತರೊಂದಿಗೆ ಸಭೆ ನಡೆಸಿ ಕಲಬುರಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟದ ಸುಧಾರಣೆಗೆ ಬೇಕಾದ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಿದೆ.ಈ ಶೈಕ್ಷಣಿಕ ವರ್ಷಕ್ಕೆ ನೀಲನಕ್ಷೆಯನ್ನು ಸಿದ್ಧಪಡಿಸಲು ಅವರಿಗೆ ಸೂಚಿಸಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.