ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಬೆಂಗಳೂರು ಕಮಿಷನರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರನ್ನು ಅಮಾನತುಮಾಡಿರುವುದು ಒಂದು ನಾಟಕವಷ್ಟೇ ಎಂದಿದ್ದಾರೆ.
ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ ಒಂದು ಡ್ರಾಮಾ. ಒಂದು ತಿಂಗಳು ಸಸ್ಪೆಂಡ್ ಮಾಡುತ್ತೇವೆ. ಬೇಸರ ಮಾಡಿಕೊಳ್ಳಬೇಡಿ ಎಂದು ಮೊದಲೇ ಹೇಳಿರುತ್ತಾರೆ. ಸಸ್ಪೆಂಡ್ ಆದ ಡಿಸಿಪಿ ಒಬ್ಬರು ಅಪ್ಪಯ್ಯನ ಆತ್ಮೀಯರು ಎಂದು ಹೇಳಿದರು.
ಪೊಲೀಸ್ ಇಲಾಖೆ ಸಲಹೆ ಧಿಕ್ಕರಿಸಿ 11 ಜೀವ ಬಲಿಯಾಗಿದೆ. ಅದಕ್ಕೆ ಮೂಲ ಕಾರಣ ರಾಜ್ಯ ಸರ್ಕಾರ. ತಮ್ಮ ತಪ್ಪು ಮುಚ್ಚಿಕೊಳ್ಳಲು ಕಮಿಷ್ನರ್ ಸೇರಿ ಹಲವರನ್ನು ಅಮಾನತು ಮಾಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಲಕ್ಷಾಂತರ ಜನರು ಸೇರಿದ್ದರು. ಆಗ ಬಿ.ದಯಾನಂದ್ ಅವರೇ ಕಮಿಷ್ನರ್ ಆಗಿದ್ದರು. ಒಂದೇ ಒಂದು ಸಣ್ಣ ಅಹಿತಕರ ಘಟನೆಗೂ ಅವಕಾಶ ಮಾಡಿಕೊಟ್ಟಿಲ್ಲ. ಈಗ ಸರ್ಕಾರದ ಬೇಜವಾಬ್ದಾರಿಯಿಂದ ದುರಂತ ನಡೆದಾಗ ಕಮಿಷನ್ರ್ ಹಾಗೂ ಪೊಲೀಸರು ಹೇಗೆ ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದ್ದಾರೆ.