ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ, ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಶಾಸಕ ಸುರೇಶ್ ಗೌಡ ಸೇರಿ ಹಲವರು ಸಾಥ್ ನೀಡಿದ್ದಾರೆ. ಹೇಮಾವತಿ ಲಿಂಕ್ ಕೆನಾಲ್ ಆರಂಭಕ್ಕೆ ವಿರೋಧಿಸಿರುವ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯಲ್ಲಿಯೇ ಅಡ್ಡಲಾಗಿ ಮಲಗಿ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಆದಾಗ್ಯೂ ಪ್ರತಿಭಟನೆ ಹಿಂಪಡೆಯದ ಹೋರಾಟಗಾರರು ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ.
ಸುಂಕಾಪುರ ದಾರಿಯುದ್ದಕ್ಕೂ ಬ್ಯಾರಿಕೇಡ್ ಗಳನ್ನು ಅಳವಡಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.