ಹಾವೇರಿ: ಸ್ಥಳೀಯ ಸಂಸ್ಥೆಗಳ ನೌಕರರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜೂನ್ 1ರ ಭಾನುವಾರದಿಂದ ಕುಡಿಯುವ ನೀರು ಪೂರೈಕೆ ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಪೌರ ಸೇವಾ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್. ಪ್ರಸಾದ್ ಹೇಳಿದ್ದಾರೆ.
ಹಾವೇರಿ ನಗರಸಭೆ ಎದುರು ರಾಜ್ಯ ಪೌರ ನೌಕರರ ಸಂಘ, ರಾಜ್ಯ ಪೌರ ಸೇವಾ ನೌಕರರ ಸಂಘದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಶುಕ್ರವಾರ ಭಾಗವಹಿಸಿದ್ದ ಪ್ರಸಾದ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ನೌಕರರು ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಕಾನೂನು ಕಾರಣದ ನೆಪ ಹೇಳುತ್ತಿದೆ. ಇದರ ವಿರುದ್ಧ ಹೋರಾಟ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ 360 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜೂನ್ 1ರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದ್ದಾರೆ.
ಕಸ ಸಂಗ್ರಹ, ವಿಲೇವಾರಿ ಕಾರ್ಯವನ್ನು ಶೇಕಡ 50ರಷ್ಟು ಸ್ಥಗಿತಗೊಳಿಸಿ ಮೇ 28 ರಿಂದ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಹೋರಾಟ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಮತ್ತು ಇಲಾಖೆ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿಸುವ ಭರವಸೆ ನೀಡಿಲ್ಲ. ಹೀಗಾಗಿ ಹೋರಾಟ ಮುಂದುವರೆಸಲಾಗಿದೆ ಇದರಿಂದ ಸ್ವಚ್ಛತೆ ಕಸ ಸಂಗ್ರಹ, ವಿಲೇವಾರಿ, ನೀರು ಪೂರೈಕೆ, ಕಚೇರಿ ಕೆಲಸಗಳು ವ್ಯತ್ಯಯವಾಗಲಿವೆ ಎಂದು ತಿಳಿಸಿದ್ದಾರೆ.